ಗಣರಾಜ್ಯೋತ್ಸವ ರಾಷ್ಟ್ರೀಯ ಏಕತೆ, ಮತ್ತು ಸಾಮರಸ್ಯದ ಹಬ್ಬ – ಬಿ.ವಾಮದೇವಪ್ಪ

ದಾವಣಗೆರೆ: ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು. ಅವರಿಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ೭೪ ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜ ಅನಾವರಣ ಮಾಡಿ ಮಾತನಾಡುತ್ತಿದ್ದರು. ಆಗಸ್ಟ್ 15, 1947 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26, 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನವಾಗಿದೆ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದು
ಬಿ.ವಾಮದೇವಪ್ಪ ತಿಳಿಸಿದರು.
ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿಯವರು ಮಾತನಾಡಿ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ಸ್ವಾತಂತ್ರ್ಯ ಭಾರತದ ಸಂವಿಧಾನದಲ್ಲಿ ಇರುವ ಐದು ಪ್ರಮುಖ ಮೌಲ್ಯಗಳಾಗಿವೆ. ಈ ಮೌಲ್ಯಗಳ ಪರಿಪಾಲನೆ ಮತ್ತು ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಜಿ.ರುದ್ರಯ್ಯ, ಸಾಹಿತಿ ಹೆಚ್.ಎನ್.ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಲಾವಿದ ಹಾಗೂ ಗೃಹ ರಕ್ಷಕ ದಳದ ನಿವೃತ್ತ ಜಿಲ್ಲಾ ಕಮಾಂಡೆಂಟ್ ಎ.ಮಹಾಲಿಂಗಪ್ಪ ಧ್ವಜ ನಿರ್ವಹಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ೬೩ ನೇ ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿಯವರನ್ನು ಹಾಗೂ ಪೌರ ಕಾರ್ಮಿಕರಾದ ರೂಪಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಕಛೇರಿಯ ವಿಭಾಗೀಯ ಪ್ರಬಂಧಕ ಜಿ.ಜಿ.ದೊಡ್ಡಮನಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಜಿ.ಆರ್.ಷಣ್ಮುಖಪ್ಪ, ಕೆ.ಬಿ.ಪರಮೇಶ್ವರಪ್ಪ, ಸುದರ್ಶನ್, ಜಿಲ್ಲಾ ಕಸಾಪ ಮಾಜಿ ಗೌರವ ಕಾರ್ಯದರ್ಶಿ ಹಾಗು ರಂಗ ಕಲಾವಿದ ಎನ್.ಎಸ್.ರಾಜು, ಸತ್ಯಭಾಮಾ ಮಂಜುನಾಥ್, ಬಿ.ಎಮ್.ಭೈರವೇಶ್ವರ, ಶರಣ ಸಾಹಿತ್ಯ ಪರಿಷತ್ತು ತಾಲೂಕ ಅಧ್ಯಕ್ಷ ಪರಮೇಶ್ವರಪ್ಪ, ಲೋಕೇಶ್, ಬಕ್ಕೇಶ್ ನಾಗನೂರ್, ಆರ್.ಶಿವಕುಮಾರ್, ಮೇಗಳಮನೆ ಶಿವಕುಮಾರ್, ನಿವೃತ್ತ ಪ್ರಾಚಾರ್ಯ ಗುಡ್ಡಪ್ಪ, ಕುಸುಮಾ ಲೋಕೇಶ್, ರೂಪಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.