ದಾವಣಗೆರೆ: (Agriculture ) ಕರ್ನಾಟಕ ರಾಜ್ಯ ಮನರೇಗಾ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಪ್ರಾದೇಶಿಕ ಕಚೇರಿ ವತಿಯಿಂದ ಇಲ್ಲಿನ ನಗರದ ರೋಟರಿ ಬಾಲಭವನದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಮತ್ತು ರೈತರಿಗೆ ಕೃಷಿ ಉಪಕರಣಗಳಾದ ಅಡಿಕೆ ಮರ ಹತ್ತುವ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅರುಣಾ ಸುರೇಶ್ ನಿಟ್ಟುವಳ್ಳಿ ಅವರು ಮಾತನಾಡಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯು ಕೆಲವು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಕಂಪನಿಗಳು ನೀಡುವ ಸಿಎಸ್ಆರ್ ಫಂಡ್ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ರಾಜಪ್ಪ ಮಲ್ಲಿಗೇನಹಳ್ಳಿ ಅವರು, ಕಾರ್ಮಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಇರುವ ಪರಿಹಾರಗಳು ಹಾಗೂ ಸರ್ಕಾರದಿಂದ ಸಿಗುವ ಸೌಕರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕಾರ್ಮಿಕ ವರ್ಗದ ಮಕ್ಕಳಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಎಲ್ಲ ಸೌಲಭ್ಯಗಳು ಸಿಗಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನವೇ ಕಾರಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 25 ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯ ಮೇಲೆ ಗೀತಮ್ಮ ಎಸ್.ಡಿ. ಹರಿಹರ, ಪುಷ್ಪ ಮಹೇಶ್ವರಪ್ಪ, ಮಹೇಶ್ವರಪ್ಪ ದೊಡ್ಡಮನಿ, ಶಾಂತಪ್ಪ, ವಿಜಯ್ ಕುಮಾರ್ ಹಾಗೂ ರಾಜು ಉಪಸ್ಥಿತರಿದ್ದರು. ಕಾರ್ಮಿಕ ಸಂಘದ ಅನೇಕ ಮುಖಂಡರು, ಪೋಷಕರು ಮತ್ತು ಮಕ್ಕಳು ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಡಿ. ಮಹೇಶ್ವರಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು, ಜ್ಯೋತಿ ಪ್ರಾರ್ಥಿಸಿದರು.
Leave a comment