ಶಾಸಕ ಮಾಡಾಳು ಪುತ್ರ ಬಂಧನ: ಸಿಎಂ ರಾಜೀನಾಮೆಗೆ ಡಿಕೆಶಿ ಆಗ್ರಹ

ಶಾಸಕ ಮಾಡಾಳು ಪುತ್ರ ಬಂಧನ: ಸಿಎಂ ರಾಜೀನಾಮೆಗೆ ಡಿಕೆಶಿ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಪ್ಪೊಪ್ಪಿಕೊಂಡು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಶುಕ್ರವಾರ ಆಗ್ರಹಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ನ ಆರೋಪ ಮಾಡುತ್ತಲೇ ಬಂದಿದೆ. ಈ ಮಧ್ಯೆ ಬಹಿರಂಗವಾಗಿರುವ ಲಂಚ ಪ್ರಕರಣ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ್ದು, ಇದನ್ನೇ ದಾಳವಾಗಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಡಿಕೆಶಿ ಇದೀಗ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್‌) ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು 40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ಭಷ್ಟ್ರಾಚಾರಕ್ಕೆ ಇದಕ್ಕಿಂತಲೂ ಸಾಕ್ಷಿ ಬೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಭ್ರಷ್ಟಾಚಾರ ಮಾಡಿದ್ದೇ ಆದರೆ ಸಾಕ್ಷ್ಯ ಕೊಡಿ ಎಂದು ಮುಖ್ಯಮಂತ್ರಿಗಳು ಕೇಳುತ್ತಿದ್ದರು. ಚನ್ನಗಿರಿ ಶಾಸಕರ ಪುತ್ರನ ಕಚೇರಿಯಲ್ಲಿ ನಡೆದಿರುವ ಲೋಕಾಯುಕ್ತ ದಾಳಿಗಿಂತ ಸಾಕ್ಷಿ ಬೇಕೇ? ಈಗಲಾದರೂ ಮುಖ್ಯಮಂತ್ರಿ ತಮ್ಮ ತಪ್ಪೊಪ್ಪಿಕೊಂಡು ರಾಜೀನಾಮೆ ನೀಡಬೇಕು. ಬಿಜೆಪಿಯ ಭ್ರಷ್ಟಾಚಾರ ಬಯಲಿಗೆಳೆದ ಲೋಕಾಯುಕ್ತ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಡಿಕೆಶಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!