Students: ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ಬೋಧಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಫೆ.20: (Students) ವಸತಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹೇಳಬೇಕು ಇದರಿಂದ ಅವರಲ್ಲಿನ ಆತಂಕ ನಿವಾರಣೆಯಾಗಲು ಸಾಧ್ಯವಾಗುತ್ತದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಶಾಲಾಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದರು ಸ್ವಚ್ಚ ಹಾಗೂ ಸುಂದರವಾದ ವಾತಾವರಣದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮವಾದ ಪರಿಸರವಿದ್ದು.ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಲಭಿಸಬೇಕು.ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರಾಗಿ ನಾನು ಕೂಡ ಸೂಕ್ತ ಸಹಕಾರ ನೀಡುತ್ತೇವೆ ಎಂದರು.ಪೋಷಕರು ನಂಬಿಕೆಯಿಟ್ಟು ಶಾಲೆಗೆ ಕಳಿಸುತ್ತಾರೆ ಆದ್ದರಿಂದ ಮಕ್ಕಳು ಕೂಡ ಶಿಸ್ತು ಸಂಯಮದಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.
ಮಕ್ಕಳು ಉತ್ತಮ ವಿದ್ಯಾಭ್ಯಾಸದತ್ತ ಗಮನಹರಿಸಬೇಕು ಜೊತೆಗೆ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ, ಅತ್ಯಂತ ಮಹತ್ವದ್ದಾಗಿದೆ.ಶಿಕ್ಷಕರು ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡುವ ಜೊತೆಗೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು ಎಂದರು.ಶಾಲೆಯ ಸುತ್ತಲೂ ಕಾಂಪೌಂಡ್ ನಿರ್ಮಾಣಕ್ಕೆ ಬೇಡಿಕೆಯಿಟ್ಟಿದ್ದಾರೆ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು ಎಂದರು.ಇದೇ ವೇಳೆ ಸಂಸದರು ವಿದ್ಯಾರ್ಥಿಗಳೊಂದಿಗೆ ಕೆಲಸಮಯ ಮುಕ್ತ ಸಂವಾದ ನಡೆಸಿ ಶಿಕ್ಷಣದ ಮಹತ್ವ ಹಾಗೂ ವಿದ್ಯಾರ್ಥಿಗಳ ಆಸಕ್ತಿ ಬಗ್ಗೆ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್ ಬಸವಂತಪ್ಪ,ತಹಶೀಲ್ದಾರ್ ಎಂ.ಬಿ.ಅಶ್ವಥ್,ಗ್ರಾ.ಪಂ ಅಧ್ಯಕ್ಷರಾದ ಲೋಕಣ್ಣ,ಎಪಿಎಂಸಿ ಮಾಜಿ ಅಧ್ಯಕ್ಷರಾದ ಚಂದ್ರಣ್ಣ,ಕಲ್ಪನಾ ಪರಶುರಾಮ್ ಹಾಗೂ ಅಣಜಿ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.