ದಾವಣಗೆರೆ: (ED) ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮೇಲೆ ಇಡಿ ಮೂಲಕ ದಾಳಿ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಜಾರಿ ನಿರ್ದೇಶನಾಲಯವು ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿ ಸಂಸದ ತುಕರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್, ಶ್ರೀನಿವಾಸ್, ನಾಗೇಂದ್ರ ಅವರ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ರಾಜಕೀಯ ದ್ವೇಷ ಇದರಲ್ಲಿ ಅಡಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಕುಗ್ಗಿಸಲು ಮತ್ತು ಹೆದರಿಸುವ ಭಾಗವಾಗಿದೆ ಎಂದು ದೂರಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಹಗರಣಗಳ ಮೇಲೆ ಹಗರಣ ನಡೆಸಿದೆ. ಇದು ಜಗಜ್ಜಾಹೀರಾಗಿದೆ. ಶೇಕಡಾ 40 ರಷ್ಟು ಕಮೀಷನ್ ಪಡೆದಿರುವುದಾಗಿ ಆಗಿನ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಆರೋಪ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು. ಆದ್ರೂ ಯಾವುದೇ ದಾಳಿ ಆಗಿರಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಹಗರಣಗಳ ಕುರಿತಂತೆ ಇಡಿ, ಆದಾಯ ತೆರಿಗೆ, ಸಿಬಿಐ ಏಕೆ ದಾಳಿ ನಡೆಸಿಲ್ಲ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ ನಡೆಸಿರುವ ಹಿಂದೆ ಇರುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅಧಿಕಾರ ನಡೆಸುವಾಗ ಸಿಎಂ ಹುದ್ದೆಗೆ 2 ಸಾವಿರ ಕೋಟಿ ರೂಪಾಯಿ, ಸಚಿವ ಸ್ಥಾನಕ್ಕೆ ನೂರಾರು ಕೋಟಿ ರೂಪಾಯಿ ಕೊಡಬೇಕೆಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಕುರಿತಂತೆ ಯಾವುದೇ ತನಿಖೆ ನಡೆಸಲಿಲ್ಲ. ಬಿ. ಎಸ್. ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ಬಹಿರಂಗವಾಗಿಯೇ ಹೇಳಿದ್ದರೂ ಇದುವರೆಗೆ ಯಾವುದೇ ಇಡಿ ದಾಳಿ ಆಗಿಲ್ಲ. ಬಿಜೆಪಿ ನಾಯಕರು ಭ್ರಷ್ಟಾಚಾರ ಹಗರಣದಲ್ಲಿ ಸಿಲುಕಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಹೇಳಿದ್ದಾರೆ.
ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ತಪ್ಪು ಯಾರೂ ಮಾಡಿದ್ದರೂ ತನಿಖೆ ಆಗಲಿ. ಆದ್ರೆ, ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಕೇಂದ್ರ ಸರ್ಕಾರವು ಸ್ವಾಯತ್ತ ಸಂಸ್ಥೆಗಳಾದ ಇಡಿ, ಸಿಬಿಐ ದುರುಪಯೋಗಪಡಿಸಿಕೊಳ್ಳುವುದನ್ನು ಬಿಡಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಒತ್ತಾಯಿಸಿದ್ದಾರೆ.