ಶಿಷ್ಯವೇತನ ಹಾಗೂ ಸಾರಿಗೆ ವ್ಯವಸ್ಥೆಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮನವಿ

IMG-20210916-WA0013

ದಾವಣಗೆರೆ, ಸೆ.16- ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಿ ಮತ್ತು ಶಿಷ್ಯ ವೇತನವನ್ನು ತಕ್ಷಣಕ್ಕೆಬಿಡುಗಡೆಗೊಳಿಸಿ ಹಾಗೂ ಹಾಸ್ಟೆಲ್ ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದಾವಣಗೆರೆ ನಗರ ಘಟಕದ ವತಿಯಿಂದ ನಗರದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು.

ಶಾಲಾ – ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( ಕೆಎಸ್‌ಆರ್‌ಟಿಸಿ ) ಎಲ್ಲ ಬಸ್‌ಗಳು ಸೇವೆ ಒದಗಿಸುತ್ತಿವೆ. ಆದರೂ ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ದಿನಕ್ಕೆ ಒಂದು ಅಥವಾ ಎರಡು ಬಸ್‌ಗಳು ಮಾತ್ರ ಸಂಚರಿಸುತ್ತಿವೆ . ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಡಿಪ್ಲೋಮಾ ಇಂಜಿನಿಯರಿಂಗ್ , ಸ್ನಾತಕ ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ , ಪ.ಪಂಗಡ , ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಆಗ್ರಹಿಸಿದರು.

ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ , ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿನಿಲಯಗಳ ಸಂಖ್ಯೆಗೆ ಮತ್ತು ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಅಂತರವಿದೆ . ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿ ಯಲ್ಲಿ ಸರ್ಕಾರ ತಕ್ಷಣಕ್ಕೆ ವಸತಿ ನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಕರ್ನಾಟಕದಲ್ಲಿ ಸುಮಾರು ಈ ವರ್ಷ 15 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಸಂಭವವಿದ್ದು, ಕಳೆದ ವರ್ಷದ ಪ್ರಕಾರ ಕೇವಲ ಎರೆಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ವಸತಿನಿಲಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿದ್ದು , ಇನ್ನುಳಿದ 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾಗುತ್ತಿದ್ದು , ಸರ್ಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್‌ಗಳನ್ನು ತೆರೆಯಬೇಕಿದೆ ಮತ್ತು ಹಾಸ್ಟೆಲ್‌ಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಿದೆ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಕಾರ್ಯಕರ್ತ ಎನ್. ಆಕಾಶ್, ಹೋರಾಟ ಪ್ರಮುಖ ಶಶಾಂಕ್ , ಸಹ ಕಾರ್ಯದರ್ಶಿ ಕೊಟ್ರೇಶ್, ಸಂಪರ್ಕ ಪ್ರಮುಖ್ ದೊಡ್ಡೇಶ ಮತ್ತು ಇತರರು ಇದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!