ಇಬ್ರಾಹಿಂ ಖಲೀಲ್ವುಲ್ಲಾಗೆ ಕಾಂಗ್ರೆಸ್ ಟಿಕೇಟ್ ನೀಡದಿದ್ದರೆ ಮತ ವಿಭಜನೆ ನಿಶ್ಚಿತ: ಉಸ್ಮಾನ್ ಘನಿ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿರುವ ವಕೀಲ ಇಬ್ರಾಹಿಂ ಖಲೀಲ್ವುಲ್ಲಾ ಅವರಿಗೆ ಪಕ್ಷದ ಹೈಕಮಾಂಡ್ ಟಿಕೇಟ್ ನೀಡಬೇಕೆಂದು ಅಲ್ಪಸಂಖ್ಯಾತರ ಯುವ ವೇದಿಕೆ ಒತ್ತಾಯಿಸಿದೆ.
ಇಬ್ರಾಹಿಂ ಖಲೀಲ್ವುಲ್ಲಾ ಅವರಿಗೆ ಆನೇಕ ಸಂಘ,ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗುವ ಮೂಲಕ ಯುವ ಕಾಂಗ್ರೆಸ್ನಿಂದ ರಾಷ್ಟ್ರೀಯ ಸ್ಥಾನ ಪಡೆದುಕೊಂಡಿದ್ದರು. ಭಾರತ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ರಾಜ್ಯಾದ್ಯಂತ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಆದ್ದರಿಂದ ಪಕ್ಷದ ಹೈಕಮಾಂಡ್ ಇದನ್ನು ಗಂಭಿರವಾಗಿ ಪರಿಗಣಿಸಿ ಇಬ್ರಾಹಿಂ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ವೇದಿಕೆಯ ಸಂಚಾಲಕ ಉಸ್ಮಾನ್ ಘನಿ ಕೋರಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಹುದಿನಗಳಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಟಿಕೇಟ್ಗೆ ಆಗ್ರಹಿಸುತ್ತಿದ್ದಾರೆ. ಈಗಾಗಲೇ ಎಐಸಿಸಿ ಮತ್ತು ಕೆಪಿಸಿಸಿಗೆ ಪತ್ರಗಳ ಮೂಲಕ ವಿನಂತಿಸಲಾಗಿದೆ. ಪಕ್ಷದ ಹೈಕಮಾಂಡ್ ಒಂದು ಕುಟುಂಬಕ್ಕೆ ತೃಪ್ತಿ ಪಡೆಸಲು ಹೋಗಿ ನಮ್ಮ ಮನವಿಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿರೋಧಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳ ಬೇಕಾಗುತ್ತದೆ. ಅಲ್ಲದೇ, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮುಸ್ಲಿಂ ಮತಗಳು ಜಿಲ್ಲೆಯದ್ಯಾಂತ ಬೇರೆಡೆ ಹೋಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.