ಇನ್ನುಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಸೊಂಕಿತರನ್ನ ಕೊವಿಡ್ ಕೇರ್ ಸೆಂಟರ್ ಗೆ ದಾಖಲಾತಿ ಕಡ್ಡಾಯ- ಸಚಿವ ಡಾ. ಕೆ. ಸುಧಾಕರ್

ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ
ದಾವಣಗೆರೆ: ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸದ್ಯ 4789 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 3259 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ, ಉಳಿದಂತೆ 1530 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ತಾಲ್ಲೂಕು ಒಂದರಲ್ಲಿಯೇ 1986 ಜನ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಸೂಕ್ತ ಸೌಲಭ್ಯಗಳಿಲ್ಲದೇ ಹೋಂ ಐಸೋಲೇಷನ್ನಲ್ಲಿ ಇರುವವರಿಂದ, ಹಾಗೂ ಮಾರ್ಗಸೂಚಿ ಪಾಲನೆ ಮಾಡದಿರುವ ಕಾರಣಗಳಿಂದ, ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ ಕೇರ್ ಸೆಂಟರ್ಗಳು (ಸಿಸಿಸಿ) ಕಾರ್ಯನಿರ್ವಹಿಸುತ್ತಿದ್ದು, 760 ಜನ ಸದ್ಯ ಸಿಸಿಸಿ ನಲ್ಲಿ ಇದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಸಾವು ಹಾಗೂ ಸೋಂಕಿನ ಪ್ರಮಾಣ ಕಡಿಮೆಯಾಗಬೇಕು, ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳಿರುವ ವಸತಿ ನಿಲಯಗಳು, ಸರ್ಕಾರಿ ಹಾಗೂ ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಬೇಕು. ಸೋಂಕಿತರು ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್ನಲ್ಲಿ ಇರುವುದು ಬೇಡ. ಕಡ್ಡಾಯವಾಗಿ ಅವರನ್ನು ಸಿಸಿಸಿ ನಲ್ಲಿಯೇ ದಾಖಲಿಸಬೇಕು.
ಕೊವಿಡ್ ಕೇರ್ ಸೆಂಟರ್ ಗೆ ದಾಖಲಿಸಿದ 5 ಗಂಟೆಯ ಒಳಗಾಗಿ ಅವರಿಗೆ ನಿಗದಿತ ಎಲ್ಲ ಔಷಧಿ, ಸಾಮಗ್ರಿಗಳುಳ್ಳ ಮೆಡಿಕಲ್ ಕಿಟ್ ಕೊಡಬೇಕು, ಅಲ್ಲದೆ ಅವರಿಗೆ ವೈದ್ಯರಿಂದ ಚಿಕಿತ್ಸೆ ಪ್ರಾರಂಭವಾಗಬೇಕು. ಸಿಸಿಸಿ ಗಳಲ್ಲಿ ಉತ್ತಮ ರೀತಿಯಲ್ಲಿ ವಸತಿ,ಊಟೋಪಹಾರ ಗುಣಮಟ್ಟದ್ದಾಗಿರಬೇಕು. ಉತ್ತಮ ಪೌಷ್ಠಿಕ ಆಹಾರ ನೀಡಲು ಈಗಾಗಲೆ ಆದೇಶಿಸಲಾಗಿದೆ ಎಂದು ಸಚಿವರು ಹೇಳಿದರು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸುವ ದಿಸೆಯಲ್ಲಿ ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಥಳೀಯ ಮಟ್ಟದ ಸಮಿತಿಯ ನಿರ್ಲಕ್ಷ್ಯ ಕಾರಣ ಗ್ರಾಮಗಳಲ್ಲಿ ಸೋಂಕು ಹೆಚ್ಚು ಹರಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.