ರಾಜ್ಯ ಬಜೆಟ್‌ನಲ್ಲಿ ‘ಕನ್ನಡ ಭವನ’ ನಿರ್ಮಿಸಲು ಅನುದಾನ ಮೀಸಲಿಡುವಂತೆ ಸಿಎಂ ಗೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮನವಿ

WhatsApp Image 2022-02-04 at 6.22.13 PM

ದಾವಣಗೆರೆ: ರಾಜ್ಯ ಸರಕಾರವು ಸದ್ಯದಲ್ಲೇ ಮಂಡಿಸಲಿರುವ ೨೦೨೨-೨೩ ರ ಸಾಲಿನ ಆಯವ್ಯಯದಲ್ಲಿ ನಾಡಿನ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ “ಕನ್ನಡ ಭವನ” ನಿರ್ಮಾಣ ಮಾಡಲು ಜಿಲ್ಲಾ ಕೇಂದ್ರಗಳಿಗೆ ತಲಾ ಒಂದು ಕೋಟಿ ರೂಪಾಯಿ ಮತ್ತು ತಾಲೂಕು ಕೇಂದ್ರಗಳಿಗೆ ತಲಾ ಐವತ್ತು ಲಕ್ಷ ರೂಪಾಯಿಗಳನ್ನು ಮೀಸಲಾಗಿರಿಸಲು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ವಾಮದೇವಪ್ಪ ಅವರು, ಸರ್ವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು೧೯೧೫ ರಲ್ಲಿ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನ್ನಡ ನಾಡು ನುಡಿಯ ಮೇಲಿನ ಅಭಿಮಾನದ ಪ್ರತಿರೂಪವಾಗಿ ಸ್ಥಾಪನೆಗೊಂಡಿದೆ. ೧೦೭ ವರುಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕನ್ನಡ ನಾಡು, ನುಡಿ, ಗಡಿ, ಜಲ, ಕಲೆ, ಸಾಹಿತ್ಯ, ಸಂಸ್ಕೃತಿಗಳ ಉನ್ನತಿಗಾಗಿ ರಚನಾತ್ಮಕವಾಗಿ ಕೆಲಸ ಮಾಡಿರುವ ಹೆಗ್ಗಳಿಕೆಯನ್ನು ಹೊಂದಿದೆ. ಕೇಂದ್ರ ಸಾಹಿತ್ಯ ಪರಿಷತ್ತಿನ ಮಾದರಿಯಲ್ಲಿಯೇ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳು ಸಹ ತಮ್ಮ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಕನ್ನಡ ನಾಡು ನುಡಿಯ ಪರವಾಗಿ ಕೆಲಸ ನಿರ್ವಹಿಸಿ ಜನ ಮನ್ನಣೆಗಳಿಸಿವೆ‌. ಆದರೆ ೧೦೭ ವರುಷಗಳ ತರುವಾಯವೂ ಬಹುತೇಕ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಅವುಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಸ್ವಂತ ಕಟ್ಟಡವನ್ನು ಹೊಂದಿಲ್ಲದಿರುವುದು ವಿಷಾದದ ಸಂಗತಿಯಾಗಿದೆ‌. ಈ ಬಗ್ಗೆ ರಾಜ್ಯ ಸರಕಾರಗಳು ಗಮನ ಹರಿಸಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. ಆದ್ದರಿಂದ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕನ್ನಡ ಭವನಗಳು ಇಲ್ಲವೋ ಅಂತಹ ಸ್ಥಳಗಳಲ್ಲಿ ಕನ್ನಡ ಭವನ ನಿರ್ಮಿಸಲು ಸೂಕ್ತ ಸ್ಥಳವನ್ನು ಮಂಜೂರು ಮಾಡುವುದರ ಜೊತೆಗೆ ಜಿಲ್ಲಾ ಕೇಂದ್ರಗಳಿಗೆ ತಲಾ ಒಂದು ಕೋಟಿ ರೂಪಾಯಿಗಳು ಹಾಗೂ ತಾಲ್ಲೂಕು ಕೇಂದ್ರಗಳಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಬೇಕಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಹಕ್ಕೊತ್ತಾಯ ಮಾಡಲಾಯಿತು ಎಂದು ವಾಮದೇವಪ್ಪ ಅವರು ತಿಳಿಸಿದರು.

ತನ್ನದೇ ಆದ ಸ್ವಂತ ಕಟ್ಟಡಗಳು ಇದ್ದಾಗ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ನುಡಿ, ಕಲೆ, ಕಲಾವಿದರಿಗೆ, ಸಂಸ್ಕೃತಿಗೆ, ಸಾಹಿತಿಗಳಿಗೆ, ವಾಗ್ಮಿಗಳಿಗೆ ಸೂಕ್ತವಾದ ಅವಕಾಶವನ್ನು ನೀಡಲು ಸಾಧ್ಯ. ಈ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳಿಗೆ ಕಳುಹಿಸಿರುವ ಪತ್ರದ ಪ್ರತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿಯವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಕಳುಹಿಸಿ, ಅವರುಗಳು ಸಹ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸುವಂತೆಯೂ ಕೋರಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ‌.ವಾಮದೇವಪ್ಪ ತಿಳಿಸಿದರು.

ಬಿ.ವಾಮದೇವಪ್ಪ
ಅಧ್ಯಕ್ಷರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು
ದಾವಣಗೆರೆ ಜಿಲ್ಲೆ

ಮೊಃ ೯೪೪೮೮೧೨೭೦೪

Leave a Reply

Your email address will not be published. Required fields are marked *

error: Content is protected !!