hd kumaraswamy; ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ ಬರ್ಬಾದ್ ಮಾಡಲಿದೆ ಕಾಂಗ್ರೆಸ್: ಹೆಚ್ಡಿಕೆ
![ಜೆಡಿಎಸ್ನ 2ನೇ ಪಟ್ಟಿ ರೆಡಿ ಇದೆ: ಒಂದೆರೆಡು ದಿನಗಳಲ್ಲಿ ಬಿಡುಗಡೆ ಮಾಡುವೆ: ಕುಮಾರ ಸ್ವಾಮಿ](https://garudavoice.com/wp-content/uploads/2023/04/HD-Kumaraswamy18.webp)
ಬೆಂಗಳೂರು, ಅ.9: ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸದ್ಯದಲ್ಲೇ ಆರನೇ ಭಾಗ್ಯವಾದ ಕತ್ತಲೆ ಭಾಗ್ಯ ನೀಡಲು ಸನ್ನಾಹ ನಡೆಸಿದೆ ಎಂದು ಕಾಂಗ್ರೆಸ್ ನ ಯೋಜನೆಯನ್ನು ಜೆಡಿಎಸ್ ನಾಯಕ ಹೆಚ್ ಡಿ ಕುಮಾರ ಸ್ವಾಮಿ (HD Kumaraswamy) ಲೇವಡಿ ಮಾಡಿದ್ದಾರೆ.
ಟ್ವೀಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಕಾಂಗ್ರೆಸ್ ಸರಕಾರ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಹೇಳಿದ್ದಾರೆ.
Lingayat: ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ: ಸಿದ್ದರಾಮಯ್ಯ ಕರೆ
ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ!! ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ct ravi; ಸಚಿವ ರಾಮಲಿಂಗಾ ರೆಡ್ಡಿ ತಲೆಕೆಟ್ಟವರು: ಸಿ ಟಿ ರವಿ
ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ.