ಪರಿಶಿಷ್ಟ ಸಮುದಾಯದ ಕಲ್ಯಾಣ ಕಾರ್ಯಕ್ರಮ ಕಾಳಜಿಯಿಂದ ಅನುಷ್ಠಾನಗೊಳಿಸಿ

ದಾವಣಗೆರೆ :ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿ ಆಯಾ ಸಮುದಾಯಕ್ಕೆ ಮೂಲಭೂತ ಸೌಕರ್ಯ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಅಧಿಕಾರಿಗಳಿಗೆ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿಯನ್ನು ಪರಿಶೀಲಿಸಿ 29 ಇಲಾಖೆಗಳಲ್ಲಿ 15 ಇಲಾಖೆಗಳು 100% ಪ್ರಗತಿ ಸಾಧಿಸಿವೆ ಎಂದರು.
ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಅನುದಾನವನ್ನು ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಕಲ್ಪಿಸಿ ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ನಾಗರಾಜ್, ಡಿ.ಡಿ.ಪಿ.ಐ ತಿಪ್ಪೇಶಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.