ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು, ಆರೋಪಿಸಿರುವ ಪೊಲೀಸರ ಮಂಪರು ಪರೀಕ್ಷಗೆ ಪಕ್ಷದ ಯುವ ಘಟಕ ಆಗ್ರಹ.
ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ ಕೆಆರ್ಎಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿದ ಪಕ್ಷದ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಬಂಧಿತರನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಕರ್ನಾಟಕ ರಾಷ್ಟ್ರ ಸಮಿತಿಯ ವಿರುದ್ಧ ಪೂರ್ವಗ್ರಹ ಪೀಡಿತರಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಇದೇ ವಿಷಯವಾಗಿ ನ್ಯಾಯ ಕೇಳಲು ಹೋದ ಸಮಿತಿಯ ಸದಸ್ಯರ ಮೇಲೂ ಕೇಸು ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ ಎಂದು ಕೆಟಿಜೆ ನಗರ ಠಾಣೆ ಪೊಲೀಸರ ವಿರುದ್ಧ ಕಿಡಿಕಾರಿದರು.
ಸಾಕ್ಷಾಧಾರಗಳು ಇಲ್ಲದಿದ್ದರೂ ಪೊಲೀಸ್ ಇಲಾಖೆ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ದಾಖಲಿಸಿದ್ದು, ಸತ್ಯಾಸತ್ಯತೆಗಾಗಿ ನಮ್ಮ ಪಕ್ಷದ ಬಂಧಿತ ಸದಸ್ಯರು ಹಾಗೂ ಪೊಲೀಸರನ್ನು ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿದರು.
ಈಗಾಗಲೇ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದ್ದು, ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಾಲಯದಲ್ಲಿ ಇವರ ವಿರುದ್ಧವೇ ದಾವೆ ಹೂಡಿಯಾದರೂ ನಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಬೆಂಗಳೂರು ನಗರ ಕಾರ್ಯದರ್ಶಿ ಎಲ್.ಜೀವನ್, ದಾವಣಗೆರೆ ಜಿಲ್ಲಾ ಅಧ್ಯಕ್ಷ ಮಂಜುನಾಥ ಹಳ್ಳಿಕೆರೆ, ಕಾರ್ಯದರ್ಶಿ ನಂಜುಂಡಸ್ವಾಮಿ ಇತರರು ಇದ್ದರು.