ರಾಜನಹಳ್ಳಿ ಸೀತಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ

IMG_20220729_164139

ದಾವಣಗೆರೆ: ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಿ ಉತ್ತಮ ಅಂಕ ಗಳಿಸುವ ಮೂಲಕ ತಮ್ಮ ಕಾಲೇಜು ಕೀರ್ತಿ ತರಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಶುಕ್ರವಾರ ನಗರದ ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 2019-20 ನೇ ಸಾಲಿನ ರಾಜ್ಯ ಬಂಡವಾಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಸ್ಪರ್ಧೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಓದಿ ಹೆಚ್ಚಿನ ಅಂಕ ಗಳಿಸುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಪುರುಷರಿಗಿಂತ ದೊಡ್ಡ ದೊಡ್ಡ ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅಂತಹ ಸಾಧಕ ಮಹಿಳೆಯರಿಂದ ಸ್ಫೂರ್ತಿ ಪಡೆದು ತಾವು ಕೂಡ ತಮ್ಮ ಜೀವನದಲ್ಲಿ ಉತ್ತಮ ಸ್ಥಾನಮಾನಗಳಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಹಿತನುಡಿ ಹೇಳಿದರು.


ಮಹಾನಗರ ಪಾಲಿಕೆ ಸದಸ್ಯ ಎಸ್.ಟಿ ವೀರೇಶ್ ಮಾತನಾಡಿ, ಅನೇಕ ವರ್ಷಗಳಿಂದ ಈ ಸಂಸ್ಥೆಯು ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ. ಸರ್ಕಾರಿ ಶಾಲೆ-ಕಾಲೇಜುಗಳು ಎಂದರೆ ಮೂಗು ಮುರಿಯುವ ಆಧುನಿಕ ಕಾಲದಲ್ಲಿ ಹಲವಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಸತತ ತ್ಯಾಗ, ಪರಿಶ್ರಮದಿಂದ ಯಶಸ್ಸು ಕಾಣಲು ಸಾಧ್ಯ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಾಜದಲ್ಲಿ ಒಂದು ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ-ತಾಯಿ ಹಾಗೂ ಗುರುಗಳು ಗೌರವ ಪಡುವ ಹಾಗೆ ಸಾಧನೆ ಮಾಡಬೇಕು ಎಂದರು.


ಸಮಾರಂಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಆರ್. ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಜಿ ಶಿವಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜು.ಎಂ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಸ್.ಓ ರವಿ, ಸೀತಮ್ಮ ಕಾಲೇಜಿನ ಪ್ರಾಚಾರ್ಯ ಟಿ.ಎ ಕುಸಗಟ್ಟಿ, ಪಾಲಿಕೆ ಸದಸ್ಯ ಎ.ನಾಗರಾಜ್, ದಿನೇಶ್.ಕೆ ಶೆಟ್ಟಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

ಇದೇ ವೇಳೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

error: Content is protected !!