ಮೈಸೂರು ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಚಾಲನೆ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ಆಚರಣೆಯ ಹೆಗ್ಗುರುತು ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ .
ಈ ಬಾರಿಯ 2021 ರ ಮೈಸೂರು ದಸರಾವನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಉದ್ಘಾಟಿಸಿದ್ದು , ಇಂದಿನಿಂದ ಮೈಸೂರಿನಲ್ಲಿ ದಸರಾ ಹಬ್ಬದ ವಾತಾವರಣ ಕಳೆಗಟ್ಟಲಿದೆ . ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಬೆಳಗ್ಗೆ 8.15 ಕ್ಕೆ ಸರಿಯಾಗಿ ದೀಪ ಪ್ರಜ್ವಲನೆ ಮಾಡಿ , ತಾಯಿ ಚಾಮುಂಡೇಶ್ವರಿಗೆ ನಮಿಸಿ ಈ ಬಾರಿಯ ಮೈಸೂರು ದಸರಾವನ್ನು ಉದ್ಘಾಟನೆ ಮಾಡಿದರು . ಈ ವೇಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯದ ಪ್ರಮುಖ ಸಚಿವರು ಹಾಗೂ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು .
ನಾಡಹಬ್ಬ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದ ಬಳಿಕ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ , ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಯಾಗುತ್ತಿದೆ . ಮುಖ್ಯಮಂತ್ರಿ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ . ಅರಮನೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯರಿಗೆ ಅವಕಾಶ ನೀಡಲಾಗಿದ್ದು , ದೀಪಾಲಂಕಾರ ಅದ್ಧೂರಿಯಾಗಿ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ದಸರಾ ಉದ್ಘಾಟನೆ ಮಾಡಿದ್ದು ಖುಷಿಯ ವಿಚಾರ ಎಂದು ಹೇಳಿದರು . ಈ ವೇಳೆ ಉದ್ಘಾಟನೆ ನೆರವೇರಿಸಿದ ಎಸ್.ಎಂ.ಕೃಷ್ಣ ಅವರಿಗೆ ಗೌರವ ಅರ್ಪಣೆ ಸಲ್ಲಿಸಲಾಯಿತು. ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಗೂ ದಸರಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು .