ನಾಯರಿಯವರು ಪ್ರಶ್ನಾತೀತವಾಗಿ ಸದಸ್ಯರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ – ಕೆನರಾ ಬ್ಯಾಂಕ್ ನ ಹೆಚ್.ರಘುರಾಜ

ದಾವಣಗೆರೆ: ಅನ್ಯಾಯಕ್ಕೆ ಹಾಗೂ ಶೋಷಣೆಗೆ ಒಳಗಾದವರಿಗೆ ನ್ಯಾಯ ಕೊಡಿಸುವ ಬಹು ದೊಡ್ಡ ಜವಾಬ್ದಾರಿ ಕಾರ್ಮಿಕ ಸಂಘಟನೆಗಳ ಮೇಲಿದೆ‌. ಈ ನಿಟ್ಟಿನಲ್ಲಿ‌ ಕೆ.ರಾಘವೇಂದ್ರ ನಾಯರಿಯವರು ಪ್ರಶ್ನಾತೀತವಾಗಿ ಸದಸ್ಯರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆನರಾ ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕ ಹೆಚ್.ರಘುರಾಜ ಹೇಳಿದರು.

ನಗರದಚೇತನಾ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆ.ರಾಘವೇಂದ್ರ ನಾಯರಿ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆಗಳು ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು, ಅಶಕ್ತರಿಗೆ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕು. ಉದ್ಯೋಗಿಗಳು ಹಾಗೂ ಆಡಳಿತ ಮಂಡಳಿಯ ನಡುವೆ ಸೌಹಾರ್ದಯುತವಾಗಿ ಮತ್ತು ಸೇತುವೆಯ ರೀತಿಯಲ್ಲಿ ಕೆಲಸ ಮಾಡಬೇಕು. ಆ ಸಂಘಟನಾ ಬದ್ಧತೆ ರಾಘವೇಂದ್ರ ನಾಯರಿ ಅವರಿಗಿದ್ದು, ಅವರು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಅವರಗೆರೆ ಹೆಚ್.ಜಿ.ಉಮೇಶ್ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಕಾರ್ಮಿಕ ಸಂಘಟನೆಗಳನ್ನು ಮುನ್ನಡೆಸುವುದು ನಿಜಕ್ಕೂ ಸವಾಲಿನ ಕೆಲಸವಾಗಿದೆ. ಸರಕಾರಗಳು ದಿನ ನಿತ್ಯವೆಂಬಂತೆ ಕಾರ್ಮಿಕ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿವೆ. ಕಾರ್ಮಿಕರ ಪರವಾಗಿ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಾತನಾಡುವವರ ಸಂಖ್ಯೆ ಅತೀ ವಿರಳವಾಗಿದೆ. ಈ ಹಿನ್ನಲೆಯಲ್ಲಿ‌ ಕಾರ್ಮಿಕ ಸಂಘಟನೆಗಳು ವಿರೋಧ ಪಕ್ಷದ ನೆಲೆಯಲ್ಲಿ ನಿಂತು ಹೋರಾಟದ ಮೂಲಕವಾಗಿಯೇ ಸರಕಾರಕ್ಕೆ ಪ್ರತಿರೋಧವನ್ನು ತೋರಿಸಬೇಕಾಗಿದೆ ಎಂದು ಕರೆ ನೀಡಿದರು.

ದೇಶದಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ನಡೆಯುತ್ತಿರುವ ಬಲಿಷ್ಠ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬ್ಯಾಂಕುಗಳ ವಿಲೀನ, ಖಾಸಗೀಕರಣ, ಬ್ಯಾಂಕಿಂಗ್ ಆಕ್ಟ್‌ಗೆ ತಿದ್ದುಪಡಿ ಮುಂತಾದ ರಾಷ್ಟ್ರೀಕರಣ ವಿರೋಧಿ ನೀತಿಗಳನ್ನು ತರುವುದರ ಮೂಲಕ ಬ್ಯಾಂಕುಗಳನ್ನು ದುರ್ಬಲಗೊಳಿಸಲು ಯತ್ನಿಸಲಾಗಿತ್ತಿದೆ. ಇದನ್ನು ಬ್ಯಾಂಕ್ ಕಾರ್ಮಿಕ ಸಂಘಟನೆಗಳು‌ ವಿರೋಧಿಸಿ ಈಗಾಗಲೇ ಅನೇಕ ಮುಷ್ಕರಗಳನ್ನು ನಡೆಸಿವೆ. ಈ ಹೋರಾಟ ಇನ್ನೂ ತೀವ್ರಗೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ಗೆ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೆ.ರಾಘವೇಂದ್ರ ನಾಯರಿ ದಂಪತಿಗಳನ್ನು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಅನೇಕ ಹಿರಿಯ ಕಾರ್ಮಿಕ ಮುಖಂಡರ ಮಾರ್ಗದರ್ಶನದಿಂದ ನನ್ನಲ್ಲಿ ಹೋರಾಟ ಮಾಡುವ ಚೈತನ್ಯ ಬರಲು ಸಾಧ್ಯವಾಗಿದೆ. ಸಮಾಜವು ನನ್ನನ್ನು ಬೆಳೆಸಿದೆ ಹಾಗೂ ನಾನು ಸಾಮಾಜಿಕ ಕಾರ್ಯಗಳಿಗಾಗಿ ನನ್ನನ್ನು ಸಮರ್ಪಿಸಿಕೊಂಡು ಕಾರ್ಯನಿರ್ವಹಿಸುವೆ ಎಂದರು.

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಸುಶೃತ್ ಶಾಸ್ತ್ರಿ, ಹೋಟೆಲ್ ಉದ್ಯಮಿ ಮಲ್ಯಾಡಿ ಪ್ರಭಾಕರ ಶೆಟ್ಟಿ, ದಾವಣಗೆರೆ ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಂಗಸ್ವಾಮಿ, ಯುಎಫ್‌ಬಿಯು ದಾವಣಗೆರೆ ಜಿಲ್ಲಾ ಸಂಚಾಲಕ ಕೆ.ಎನ್‌‌.ಗಿರಿರಾಜ್ ಭಾಗವಹಿಸಿದ್ದರು.

ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಜಿಲ್ಲಾ ಖಜಾಂಚಿ ಕೆ.ವಿಶ್ವನಾಥ್ ಬಿಲ್ಲವ ಮಾತನಾಡಿದರು. ಆರ್ ಆಂಜನೇಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಹೆಚ್.ಎಸ್.ತಿಪ್ಪೇಸ್ವಾಮಿ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳಾದ ಜಿ.ಜಿ.ದೊಡ್ಡಮನಿ, ಗಿರೀಶ್ ಶಾನುಭಾಗ್, ವಿಜಯ ಶಂಕರ್, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಎಸ್.ಟಿ.ಶಾಂತ ಗಂಗಾಧರ್, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!