ನಮ್ಮ ಆರೋಗ್ಯ ನಮ್ಮ ಕೈಯಲ್ಲಿ.! ಜೀವ ಹಾಗೂ ಜೀವನ ಎರಡೂ ಮುಖ್ಯ – ಸಚಿವ ಡಾ.ಕೆ.ಸುಧಾಕರ್ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ..!

ಬೆಂಗಳೂರು: ಕೋವಿಡ್-19 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.

ಜನರ ಜೀವ ಹಾಗೂ ಜೀವನ ಎರಡೂ ಮುಖ್ಯ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈಗ ಜನರು ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಅರಿತು ನಡೆಯಬೇಕು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ಸರ್ಕಾರ ಬೇರೆ ದಾರಿ ಇಲ್ಲದೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಜೊತೆ ನಡೆದ 3 ಗಂಟೆಗಳ ಸುಧೀರ್ಘ ಸಭೆಯಲ್ಲಿ ರಚನಾತ್ಮಕ ಸಲಹೆಗಳನ್ನು ತೆಗೆದುಕೊಂಡು ವೈಜ್ಞಾನಿಕ ಆಧಾರದಲ್ಲಿ ಸರ್ಕಾರ ನಿರ್ಧಾರ ಮಾಡಿದೆ. ಜನರು ಅನಗತ್ಯವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದು ಉತ್ತಮ ಎಂದು ಸಚಿವರು ಮನವಿ ಮಾಡಿದರು.

ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು. ಜನರು ಎಚ್ಚರಿಕೆಯಿಂದ ಇದ್ದಷ್ಟು ಕೊರೊನಾ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಚಿವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!