ಜಗಳೂರು ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಡಿಸಿ ಸೂಚನೆ

ದಾವಣಗೆರೆ: ಜಗಳೂರು ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗುತ್ತಿರುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ವೈದ್ಯಕೀಯ ಬಳಕೆಗೆ ಲಭ್ಯವಾಗುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ಜಗಳೂರು ತಾಲ್ಲೂಕು ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಲಸಿಕಾ ಕೇಂದ್ರಗಳಿಗೆ ಶುಕ್ರವಾರದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ಅವರೊಂದಿಗೆ ಭೇಟಿ ನೀಡಿ ಆಕ್ಸಿಜನ್ ಘಟಕ ಕಾಮಗಾರಿ ಹಾಗೂ ಲಸಿಕಾ ಕಾರ್ಯಕ್ರಮದ ಪರಿಶೀಲನೆ ನಡೆಸಿದರು.

ಜಗಳೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಆಕ್ಸಿಜನ್ ಪ್ರೊಡಕ್ಷನ್ ಪ್ಲಾಂಟ್‍ನ್ನು ಪರಿಶೀಲಿಸಿ, ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಲಭ್ಯವಾಗುವಂತೆ ಮಾಡಬೇಕು, ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಉನ್ನತ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಇಲ್ಲಿನ ಕೋವಿಡ್ ವಾರ್ಡ್‍ಗಳಿಗೆ ಭೇಟಿ ನೀಡಿ ಕೊರೊನಾ ಸೋಂಕಿತ ರೋಗಿಗಳ ಆರೋಗ್ಯವನ್ನು ವಿಚಾರಿಸಿದರಲ್ಲದೆ, ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿರುವ ಚಿಕಿತ್ಸೆ ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದರು. ನಂತರ ಸಾರ್ವಜನಿಕ ಆಸ್ಪತ್ರೆ ಎದುರು ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿ, ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಳ್ಳಲು ಆಗಮಿಸಿದ್ದ ಅಂಗವಿಕಲರಿಗೆ ಮನೋಸ್ಥೈರ್ಯ ತುಂಬಿದರು. ಅರ್ಹ ವಿಕಲಚೇತನರೆಲ್ಲರೂ ಕೂಡ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು.

ತಾಲ್ಲೂಕಿನ ಮುಸ್ಟೂರು, ಕಲ್ಲದೇವರಪುರ, ದೇವಿಕೆರೆ, ಬಿಳಿಚೋಡು ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಸಂಬಂಧಪಟ್ಟ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್ ಲಸಿಕಾ ಕಾರ್ಯಕ್ರಮ ಕುರಿತು ಖುದ್ದು ಪರಿಶೀಲನೆ ನಡೆಸಿದರು. ಮೊದಲ ಡೋಸ್ ಪಡೆದುಕೊಳ್ಳುತ್ತಿರುವ ಅಂಗವಿಕರು ಹಾಗೂ 45 ವರ್ಷದ ಮೇಲ್ಪಟ್ಟ ಲಸಿಕಾ ಫಲಾನುಭವಿಗಳನ್ನು ಮಾತನಾಡಿಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಎಲ್ಲ ಅರ್ಹ ಅಂಗವಿಕಲರು ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದೆ ಬರಬೇಕು. ಈ ಕುರಿತು ಗ್ರಾಮ ಪಂಚಾಯತ್‍ಗಳು ಮತ್ತು ಗ್ರಾ.ಪಂ. ಟಾಸ್ಕ್ ಪೋರ್ಸ್ ಸಮಿತಿ ಗ್ರಾಮಗಳಲ್ಲಿ ಡಂಗುರ ಹಾಕಿಸುವ ಮೂಲಕ ಜನರಲ್ಲಿ ಲಸಿಕಾ ಕಾರ್ಯಕ್ರಮದ ಜಾಗೃತಿ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಗಳೂರು ತಾಲ್ಲೂಕು ತಹಶೀಲ್ದಾರ್ ಗಿರೀಶ್ ಬಾಬು, ಗಣ್ಯರಾದ ಕಲ್ಲೇರುದ್ರೇಶ್ ಹಾಗೂ ಸ್ಥಳೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!