150 ಕ್ಷೇತ್ರ ಗೆಲ್ಲುವ ಗುರಿ ಕೋಲಾರದ ಆರೂ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಗಳು: ರಾಘವೇಂದ್ರ

ಕೋಲಾರ: ರಾಜ್ಯದಲ್ಲಿ 150 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಲು ತೀರ್ಮಾನಿಸಲಾಗಿದೆ. ಜಿಲ್ಲೆ ಹಿಂದುಳಿದಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು.
ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಕಂಡುಬರುತ್ತಿದ್ದು, ಕಾಂಗ್ರೆಸ್ ಶಾಸಕರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ಸ್ವಹಿತಕ್ಕಾಗಿ ಶಾಸಕ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿಯೇ, ಎಲ್ಲ ಕಡೆ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವಿದೆ. ಜೆಡಿಎಸ್, ಕಾಂಗ್ರೆಸ್ ಪೈಪೋಟಿ ನೀಡಲಿವೆಯಾದರೂ ಜನರು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದು, ಆರೂ ಕ್ಷೇತ್ರಗಳಲ್ಲಿ ಪ್ರಬಲವಾಗಿ ಪೈಪೋಟಿ ನೀಡಲು ಸಜ್ಜಾಗಿದ್ದೇವೆ ಎಂದರು.