ಮಾಡಾಳು ವಿರೂಪಾಕ್ಷಪ್ಪಗೆ ಜಮೀನು ಪ್ರಶ್ನಿಸಿ ಲೋಕಾ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಮಾಡಾಳು ವಿರೂಪಾಕ್ಷಪ್ಪ

ನವದೆಹಲಿ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಶಾಸಕರೂ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್‌) ಲಂಚ ಪ್ರಕರಣದ ಆರೋಪಿಯಾಗಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಪೀಠದ ಮುಂದೆ ತುರ್ತು ವಿಚಾರಣೆಗೆ ಲೋಕಾಯುಕ್ತ ವಕೀಲರು ಮನವಿ ಮಾಡಿದ್ದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು ಸಿಜೆಐ ಸೂಚಿಸಿದರು.
ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ ಪೀಠಕ್ಕೆ ಧಾವಿಸಿದ ಲೋಕಾಯುಕ್ತ ಪರ ವಕೀಲರು, ತುರ್ತು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಆದರೆ, ಅರ್ಜಿಯ ಶೀಘ್ರ ಇತ್ಯರ್ಥದ ಅಗತ್ಯ ಏನು ಎಂದು ನ್ಯಾಯಮೂರ್ತಿ ಕೌಲ್, ವಕೀಲರನ್ನು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ವಕೀಲರು, ಆರೋಪಿಯು ಹಾಲಿ ಶಾಸಕರಾಗಿದ್ದು, ಅವರ ಬಳಿಯಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ವಕೀಲರ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಕೌಲ್, ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದರು.
ಮಧ್ಯಾಹ್ನ 2ಗಂಟೆಗೆ ವಿಚಾರಣೆ ನಡೆಸುವಂತೆ ವಕೀಲರು ಮರು ಮನವಿ ಮಾಡಿದಾಗ, ಇದು ಜಾಮೀನು ರದ್ದು ಅರ್ಜಿಯಾಗಿರುವುದರಿಂದ ಬಿಡುವಿನ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!