ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

Share
Share

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠ್ಠಲರಾವ್ ಅವರು ಆದೇಶಿಸಿದರು.

ಅವರು ಇಂದು (ಏ.17) ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿಗಳು  ಹಾಗೂ ಉಪ ಮುಖ್ಯಮಂತ್ರಿಗಳ  ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಉನ್ನತ ಮಟ್ಟದ ಸಭೆಯ ನಿರ್ದೇಶನದಂತೆ, ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸುವಂತಿಲ್ಲ, ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಣ್ಯವಾಗಿ ಕಠಿಣ ಕ್ರಮವಹಿಸಲಾಗುವುದು.

ಜಿಲ್ಲೆಯ 103 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳಲ್ಲಿ ನೀರಿನ ಮೂಲಗಳ ಲಭ್ಯತೆ ಮತ್ತು ಗುಣಮಟ್ಟವನ್ನು ಮೊದಲೇ ಪರೀಕ್ಷಿಸಲು ಸೂಚಿಸಲಾಗಿ̧ದೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಈಗಾಗಲೇ ಘೋಷಣೆಯಾಗಿರುವ 24/7 ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಸುಸ್ಥಿರವಾಗಿ ನಿರ್ವಹಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುದಾನದ ಕೊರತೆಯಿಲ್ಲ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರರ ಪಿ.ಡಿ  ಖಾತೆಯಲ್ಲಿ ಒಟ್ಟು 8.48 ಕೋಟಿ ರೂ. ಅನುದಾನ ಲಭ್ಯವಿದೆ ಎಂದರು.

ಹೊಸ ಬೋರ್‌ವೆಲ್ ಕೊರೆಯುವುದು, ರೀಡ್ರಿಲ್ಲಿಂಗ್ ಅಥವಾ ಪೈಪ್‌ಲೈನ್ ವಿಸ್ತರಣೆಯಂತಹ ತುರ್ತು ಕಾಮಗಾರಿಗಳಿಗೆ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಿಂದ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು. ಅನುಮೋದನೆ ಇಲ್ಲದೆ ಕೈಗೊಳ್ಳುವ ಕಾಮಗಾರಿಗಳ ಬಿಲ್ ಪಾವತಿಗಾಗಿ ಅವಕಾಶವಿರುವುದಿಲ್ಲ, ನೀರಿನ ಕೊರತೆ ಕಂಡುಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲು ಪಿಡಿಒಗಳಿಗೆ ಸೂಚಿಸಲಾಗಿದ್ದು, ತೋಟದ ಪ್ರದೇಶಗಳಲ್ಲಿ ಲಭ್ಯತೆ ಇಲ್ಲದಿದ್ದಲ್ಲಿ ಟೆಂಡರ್ ಪ್ರಕ್ರಿಯೆ ಮೂಲಕ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಮೇಲ್ಮಟ್ಟದ ಟ್ಯಾಂಕ್‌ಗಳನ್ನು (OHT) ನಿಯಮಿತವಾಗಿ ಸ್ವಚ್ಛಗೊಳಿಸಲು ಪಿಡಿಒ ಹಾಗೂ ಇಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದ್ದು, ಇದರ ಮೇಲ್ವಿಚಾರಣೆಯನ್ನು ಎಇಇಗಳು ವಹಿಸಬೇಕು ಎಂದರು.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿರುವುದರಿಂದ (ElNino ಪ್ರಭಾವ), ಅಧಿಕಾರಿಗಳು ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಕಲುಷಿತ ನೀರಿನಿಂದ ಕಾಯಿಲೆಗಳು ಹರಡದಂತೆ ತಡೆಯಲು ಜಿ.ಪಂ ಮಟ್ಟದಲ್ಲಿ ಎಫ್.ಟಿ.ಕೆ (FTK) ಕಿಟ್‌ಗಳ ಮೂಲಕ ಹಾಗೂ ಲ್ಯಾಬ್‌ಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಒಂದು ವೇಳೆ ಫ್ಲೋರೋಸಿಸ್ ಅಥವಾ ಬ್ಯಾಕ್ಟೀರಿಯಾ ಸೋಂಕು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ವರದಿ ನೀಡಿ, ಅಗತ್ಯವಿದ್ದರೆ ದಂತ ಚಿಕಿತ್ಸೆ ಮತ್ತು ಮೂಳೆ ರೋಗ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಆರೋಗ್ಯ ಇಲಾಖೆ ಕ್ರಮವಹಿಸುವಂತೆ ಸೂಚನೆ ನೀಡಿದರು.

ಕಳೆದ ಸಾಲಿನಲ್ಲಿ  ಜಿಲ್ಲೆಯಲ್ಲಿ ಮುಂಗಾರು ಮಳೆ ಮೊದಲು ಮತ್ತು ನಂತರ 694 ಹಳ್ಳಿಗಳಿಂದ 26,248 ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 107% ಗುರಿಗಿಂತ ಹೆಚ್ಚಿನ ಸಾಧನೆ ಸಾಧಿಸಲಾಗಿದೆ ಹಾಗೂ 5777 ಕೆಮಿಕಲ್‌ ಲ್ಯಾಬ್‌  ಮತ್ತು 923 ಮೈಕ್ರೋಬಯಲಾಜಿ ಲ್ಯಾಬ್‌ ಪರೀಕ್ಷೆಗಳನ್ನು ಮಾಡಲಾಗಿದೆ ಎಂದರು.

ಮೇ 29 ರಿಂದ ಶಾಲೆಗಳು ಪುನರಾರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ, ಶಾಲೆಗಳಲ್ಲಿ ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಜೆಜೆಎಂ (JJM) ಸಂಪರ್ಕ ಮತ್ತು ಕೊಳವೆ ಬಾವಿಗಳ ಸ್ಥಿತಿಗತಿಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

ಜಿಲ್ಲೆಯ ಹರಿಹರ ಭಾಗದ ರೈತರು ಭತ್ತದ ಬೆಳೆಗೆ ಮೇ 10ರವರೆಗೆ ನೀರು ಒದಗಿಸುವಂತೆ ಕೋರಿದ್ದಾರೆ. ಈ ಕುರಿತು ಜಲ ಸಂಪನ್ಮೂಲ ಇಲಾಖೆ ಹಾಗೂ ನೀರು ಬಳಕೆದಾರರ ಸಂಘಗಳೊಂದಿಗೆ ಚರ್ಚಿಸಿ, ಸಮರ್ಪಕ ನೀರು ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು.

ಯೋಜನೆಯ ಸುಸ್ಥಿರ ನಿರ್ವಹಣೆಗಾಗಿ ಸರ್ಕಾರದಿಂದ ಪ್ರತಿ ಗ್ರಾಮಕ್ಕೆ 3 ಲಕ್ಷ ರೂ.ಗಳಂತೆ ಒಟ್ಟು 46 ಗ್ರಾಮಗಳಿಗೆ 1 ಕೋಟಿ 38 ಲಕ್ಷ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಗ್ರಾಮ ಪಂಚಾಯತ್‌ಗಳ VWSC (ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ) ಖಾತೆಗೆ ಜಮಾ ಮಾಡಲಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಈ ಅನುದಾನವನ್ನು ಬಳಸಿಕೊಂಡು ಕೆಟ್ಟುಹೋದ ನಲ್ಲಿಗಳ ದುರಸ್ತಿ, ಪೈಪ್‌ಲೈನ್ ನಿರ್ವಹಣೆ ಹಾಗೂ ಹೊಸ ಪರಿಕರಗಳ ಖರೀದಿಗೆ ಆದ್ಯತೆ ನೀಡಬೇಕು.

ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ಅಥವಾ ಯೋಜನೆ ಸ್ಥಗಿತಗೊಂಡರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಯಾವುದೇ ಹಂತದಲ್ಲಿ ನಿರ್ಲಕ್ಷ್ಯ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕುವಾರು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು.

ಸಾರ್ವಜನಿಕರಿಂದ ದೂರು ಸ್ವೀಕರಿಸಿದ ತಕ್ಷಣವೇ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಹಾಯವಾಣಿ ಕೇಂದ್ರಗಳ ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆಯವರಿಗೆ ಕಾರ್ಯನಿರ್ವಹಿಸಲಿವೆ.

ಸಹಾಯವಾಣಿ ಕೇಂದ್ರಗಳ ವಿವರ:

ದಾವಣಗೆರೆ ಜಿಲ್ಲಾ ವಿಭಾಗ: 08192-262126 , ದಾವಣಗೆರೆ ಉಪವಿಭಾಗ: 08192-262120, ಹರಿಹರ ಉಪವಿಭಾಗ: 08192-242352 ,  ಚನ್ನಗಿರಿ ಉಪವಿಭಾಗ: 08189-295071 ,
ಹೊನ್ನಾಳಿ ಉಪವಿಭಾಗ: 08188-252571 ,  ಜಗಳೂರು ಉಪವಿಭಾಗ: 08196-227707 

ಜಲಜೀವನ ಮಿಷನ್‌ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಜಲಜೀವನ್ ಮಿಷನ್ (JJM) ಯೋಜನೆಯಡಿ ಕೈಗೆತ್ತಿಕೊಂಡಿರುವ ಎಲ್ಲಾ ಬಾಕಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದರು.

ಈ ಯೋಜನೆಯಡಿ ಪ್ರತಿ ಮನೆಗೂ ನಳದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಯಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸಬಾರದು.  ಈಗಾಗಲೇ ಪ್ರಗತಿಯಲ್ಲಿರುವ ಮತ್ತು ಅಂತಿಮ ಹಂತದಲ್ಲಿರುವ ಕಾಮಗಾರಿಗಳನ್ನು ತಕ್ಷಣವೇ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ಅಥವಾ ತಾಂತ್ರಿಕ ಕಾರಣಗಳಿಂದ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳ ಮೂಲಕ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲ ಅಭಿಯಂತರರಾದ ನಾಗೇಂದ್ರಪ್ಪ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ, ಆರ್.ಡಿ.ಪಿ.ಆರ್‌ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Siddu is the country's number one honest prophet: Minister Bairathi Suresh
ದಾವಣಗೆರೆ

Siddu; ಸಿದ್ದು ದೇಶದ ನಂಬರ್ ಒನ್ ಪ್ರಾಮಾಣಿಕ ಮುತ್ಸದ್ದಿ: ಸಚಿವ ಬೈರತಿ ಸುರೇಶ್ ಬಣ್ಣನೆ

ಹರಿಹರ: (Siddu) ದೇಶದ ಅತ್ಯಂತ ಪ್ರಾಮಾಣಿಕ ರಾಜಕಾರಣಿಗಳ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸ್ಥಾನದಲ್ಲಿದ್ದಾರೆ ಎಂದು...