ತುರ್ತು ಚಿಕಿತ್ಸಾ ಘಟಕಕ್ಕೆ ( ಟ್ರಾಮಾ ಕೇರ್ ಸೆಂಟರ್ ) ಗೆ ಚಾಲನೆ ನೀಡಿದ ಬಿ ಎ ಬಸವರಾಜ್

 

ದಾವಣಗೆರೆ : ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 90 ಕೋಟಿ 56 ಲಕ್ಷ ರೂ. ಅನುದಾನದಲ್ಲಿ 50 ಹಾಸಿಗೆ ಸಾಮರ್ಥ್ಯವುಳ್ಳ ಟ್ರಾಮಾ ಕೇರ್ ಸೆಂಟರ್ (ತುರ್ತು ಚಿಕಿತ್ಸಾ ಘಟಕ) ಆಸ್ಪತ್ರೆ ನಿರ್ಮಾಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕಿತರಿಗೆ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ 50 ಹಾಸಿಗೆಯುಳ್ಳ ಆಸ್ಪತ್ರೆಯ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇನ್ನೂ 14 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿಸಿ ಲೋಕಾರ್ಪಣೆಗೊಳಿಸುತ್ತೇವೆ ಎಂದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 90 ಕೋಟಿ 56 ಲಕ್ಷ ರೂ. ವೆಚ್ಚದ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಆಕ್ಸಿಜನ್, ಐಸಿಯು, ಎಕ್ಸ್ರೇ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಇಂದು ದಾವಣಗೆರೆ ಜನರಿಗೆ ಉಪಯೋಗವಾಗುವಂತಹ ಕೆಲಸಗಳು ನಡೆಯುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿಹೆಚ್‌ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!