ಉಳ್ಳಾಲ: ಗಾಂಜಾ ನಶೆಯಲ್ಲಿ ಜೀಪ್ ಚಾಲನೆ – ತನ್ನ ಪಾಡಿಗೆ ಮನೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಬಲಿ.!

ಉಳ್ಳಾಲ: ಜೀಪೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಡಿವೈಡರ್ ಗೆ ಬಡಿದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ಯ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟವರನ್ನು ಕೊಲ್ಯ ನಿವಾಸಿ ಸಂತೋಷ್ ಬೆಳ್ಳಾಡ (45) ಎನ್ನಲಾಗಿದೆ.

ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯ ವಾಹನ ಚಾಲನೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂತೋಷ್ ಬಾಳೆಹಣ್ಣು ವ್ಯಾಪಾರಿಯಾಗಿದ್ದು, ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಆಯತಪ್ಪಿದ ಕಾರು ಎದುರಿನಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂತೋಷ್ ಅವರಿಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ಡಿವೈಡರ್ ಗೆ ಬಡಿದ ಪರಿಣಾಮ ಸಂತೋಷ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!