ವಿದ್ಯುತ್ ತಿದ್ದುಪಡಿ ಮಸೂದೆ ೨೦೨೧ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ

ದಾವಣಗೆರೆ: ವಿದ್ಯುತ್ ತಿದ್ದುಪಡಿ ಮಸೂದೆ ೨೦೨೧ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಲಾಯಿತು.
ವಿದ್ಯುತ್ ಮಸೂದೆ ತಿದ್ದುಪಡಿ ಮಾಡಲು ಹೊರಟಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೇಂದ್ರ ಹಾಗೂ ರಾಜ್ಯಸರ್ಕಾರಕ್ಕೆ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಕೇಂದ್ರ ಸರ್ಕಾರ ಮುಂಗಾರು ಅಧಿವೇಶನದಲ್ಲಿ ವಿದ್ಯುತ್ ಮಸೂದೆ ತಿದ್ದುಪಡಿ ಮಾಡಿ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ವಿದ್ಯುತ್ ಪೂರೈಕೆ ಖಾಸಗೀಕರಣಗೊಂಡರೆ ರೈತರು, ಕೂಲಿ ಕಾರ್ಮಿಕರು, ಭಾಗ್ಯಜ್ಯೋತಿ, ಕುಬೇರ ಜ್ಯೋತಿ, ಕೃಷಿ ಪಂಪ್ಸೆಟ್ಗಳಿಗೆ ನೀರು ಸರಬರಾಜಿಗೆ ಸರ್ಕಾರದ ಸಬ್ಸಿಡಿ ಸಿಗದೆ ತೊಂದರೆಯುಂಟಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ತಂದಿದ್ದು, ಇದನ್ನು ವಿರೋಧಿಸಿ ರಾಷ್ಟ್ರವ್ಯಾಪ್ತಿ ರೈತ ಚಳುವಳಿ ನಡೆಯುತ್ತಿದ್ದು, ದೆಹಲಿಯಲ್ಲಿ ಸುಮಾರು ೧೮ ತಿಂಗಳುಗಳಿಂದ ಹೆದ್ದಾರಿಗಳಲ್ಲಿ ರೈತರು ಬೀಡು ಬಿಟ್ಟು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈಗ ಮತ್ತೆ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ ಎಂದು ಕಿಡಿಕಾರಿದರು.
ಈ ಹಿಂದೆ ಜನರು ಬಳಸುವ ಅಡುಗೆ ಅನಿಲಕ್ಕೆ ಸಬ್ಸಿಡಿ ಕೊಡುವುದಾಗಿ ನಂಬಿಸಿ ಈಗ ಸಬ್ಸಿಡಿ ಹಣವನ್ನು ಕೊಡದೇ ಮೋಸ ಮಾಡಲಾಗುತ್ತಿದ್ದು, ಈಗ ವಿದ್ಯುತ್ ಖಾಸಗೀಕರಣಗೊಂಡರೆ ರೈತರು ಸಹ ಮೊದಲು ಹಣ ಪಾವತಿಸಿ, ಬಳಿಕ ಕೃಷಿ ಪಂಪ್ ಸೆಟ್ಗಳಿಗೆ ವಿದ್ಯುತ್ ಬಳಕೆ ಮಾಡಿಕೊಳ್ಳಬೇಕಾಗುತ್ತದೆ. ಪ್ರೀಪೇಡ್ ಶುಲ್ಕ ಪಾವತಿಸಿ ಜನರು ಮೊಬೈಲ್ ಬಳಸುವ ಹಾಗೆ ಪಂಪ್ ಸೆಟ್ಗಳಿಗೆ ವಿದ್ಯುತ್ ಬಳಸಬೇಕಾಗುತ್ತದೆ ಎಂದು ಅಸಮಾಧಾನ ಹೊರಹಾಕಿದರು.
ಕೋವಿಡ್ ನಂತಹ ಸಾಂಕ್ರಾಮಿಕ ಮಹಾಮಾರಿ ರೋಗ ತಗುಲಿ ದೇಶದಲ್ಲಿ ಜನರು, ಕೈಗಾರಿಕೆಗಳು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಪರಿಸ್ಥಿತಿಯಲ್ಲಿ ಈ ಕಾಯ್ದೆಗಳು ಮರಣ ಶಾಸನವಾಗಿ ಪರಿಣಮಿಸಲಿವೆ. ಆದ್ದರಿಂದ, ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದೆಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಕೆಂಚನಹಳ್ಳಿ ಶೇಖರಪ್ಪ, ಚಿನ್ನಸಮುದ್ರ ಶೇಖರನಾಯ್ಕ್, ಹೊನ್ನೂರು ಮುನಿಯಪ್ಪ, ಸಂತೋಷ, ಕಾಳೇಶ ಯಲೋದಹಳ್ಳಿ, ಎನ್. ಬಸವರಾಜ ದಾಗಿನಕಟ್ಟೆ, ಎಂ. ಪರಮೇಶ್ವರಪ್ಪ, ನಿರಂಜನಗೌಡ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.