ವಿಶ್ವಹಿಂದೂ ಪರಿಷತ್ ಕಾರ್ಯಕರ್ತ ಅನುಮಾನಾಸ್ಪದ ಸಾವು: ತನಿಖೆಗೆ ಆಗ್ರಹ

ಬಂಟ್ವಾಳ: ಸಜಿಪನಡು ಗ್ರಾಮದ ಸಾನದ ಮನೆಯ ರಾಜೇಶ ನಾಗೇಶ ಪೂಜಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತನಿಖೆ ನಡೆಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ.
ರಾಜೇಶ್ ಅವರ ಶವ ಬಿ.ಸಿ.ರೋಡ್ ಸಮೀಪದ ಪಾಣೆಮಂಗಳೂರು ಹಳೆ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿತ್ತು. ಇವರು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಾಗಿದ್ದರು.
ರಾಜೇಶ್ ಅವರ ಸಾವಿನಲ್ಲಿ ಸಂದೇಹ ಇದ್ದು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಆಗ್ರಹಿಸಿದ್ದಾರೆ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ರಾಜೇಶ ಬುಧವಾರ ಬೆಳಿಗ್ಗೆ 8.30ರ ವೇಳೆ ಕೆಲಸಕ್ಕೆಂದು ಹೋದವರು ಮರಳಿ ಬಂದಿರಲಿಲ್ಲ. ಗುರುವಾರ ಬೆಳಿಗ್ಗೆ ಸಂಬಂಧಿಯೊಬ್ಬರು ರಾಜೇಶ ಅವರ ದ್ವಿಚಕ್ರ ವಾಹನವನ್ನು ಸೇತುವೆಯ ಬಳಿ ಕಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನದಿಯಲ್ಲಿ ಹುಡುಕಿದಾಗ ಶವ ಪತ್ತೆಯಾಗಿದೆ.
ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸಂಜೆ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ನಂತರ ಸಜಿಪನಡು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಯಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!